ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ವಿಶೇಷವೆಂದರೆ, ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಮೂರು ತಾಲೂಕುಗಳು ಬರಪೀಡಿತ ಘೋಷಣೆಗೆ ಒಳಪಟ್ಟಿವೆ. ಇದರಿಂದ ರೈತರು ಹಾಗೂ ಜನಪ್ರತಿನಿಧಿಗಳ ಹಲವು ದಿನಗಳ ಆಗ್ರಹಕ್ಕೆ ಸ್ಪಂದನೆ ದೊರೆತಂತಾಗಿದೆ.
ಇದೇ ವೇಳೆ, ಧಾರವಾಡ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಸಚಿವರಾದ ಸಂತೋಷ ಲಾಡ್ ಹಾಗೂ ವಿನಯ ಕುಲಕರ್ಣಿ ಸರ್ಕಾರವನ್ನು ಆಗ್ರಹಿಸಿದ್ದರು.
ಆದರೆ, ಧಾರವಾಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ, ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ಹಾಗೂ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆಗ್ರಹಿಸಿದ್ದರು.
ಸರ್ಕಾರದ ಈ ಘೋಷಣೆಯಿಂದ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೂರು ತಾಲೂಕುಗಳಿಗೆ ಬರ ಪರಿಹಾರ ಕ್ರಮಗಳ ನಿರೀಕ್ಷೆ ಮೂಡಿದ್ದು, ಧಾರವಾಡ ತಾಲೂಕನ್ನು ಪಟ್ಟಿಗೆ ಸೇರಿಸುವಂತೆ ಒತ್ತಾಯ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.




